
101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಅನ್ನದಾತರು ಆತಂಕಕ್ಕೀಡಾಗಿರುವುದು ಸರ್ಕಾರದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ರೈತರ ಸಂಕಷ್ಟವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅವರ ನೆರವಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಜೂನ್ 1ರಿಂದ 2026ರ ಆಗಸ್ಟ್ 21ರವರೆಗೆ ರಾಜ್ಯದ 29 ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದು, ಕೇವಲ ಎರಡು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ. ತಾಲೂಕು ಮಟ್ಟದಲ್ಲಿ 176 ತಾಲೂಕುಗಳು ಮಳೆ ಕೊರತೆ ವರ್ಗದಲ್ಲಿದ್ದು, 15 ತಾಲೂಕುಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವೆ. 49 ತಾಲೂಕುಗಳಲ್ಲಿ ಮಾತ್ರ ಸಾಮಾನ್ಯದಿಂದ ಅಧಿಕ ಮಳೆಯಾಗಿದೆ.
ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ಮೌಲ್ಯಮಾಪನ ಹಾಗೂ ನಿಗದಿತ ಮಾರ್ಗಸೂಚಿಗಳ ಅನ್ವಯ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಇದರಲ್ಲಿ 89 ತಾಲೂಕುಗಳನ್ನು ತೀವ್ರವಾಗಿ ಬಾಧಿತ ಹಾಗೂ 12 ತಾಲೂಕುಗಳನ್ನು ಮಧ್ಯಮವಾಗಿ ಬಾಧಿತ ತಾಲೂಕುಗಳೆಂದು ವರ್ಗೀಕರಿಸಲಾಗಿದೆ. ಈ ಘೋಷಣೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ರಾಜ್ಯ ಸರ್ಕಾರ ಮುಂಚಿತವಾಗಿ ರದ್ದುಗೊಳಿಸದ ಹೊರತು ಆದೇಶದ ದಿನಾಂಕದಿಂದ ಆರು ತಿಂಗಳವರೆಗೆ ಜಾರಿಯಲ್ಲಿರಲಿದೆ.
ರೈತರಿಗೆ ತುರ್ತು ಪರಿಹಾರ ಹಾಗೂ ಅಗತ್ಯ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಎಸ್ಡಿಆರ್ಎಫ್ ನಿಯಮಗಳಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಆದ್ಯತೆಯ ಮೇರೆಗೆ ಜಂಟಿ ಬೆಳೆ ನಷ್ಟ ಸಮೀಕ್ಷೆ ನಡೆಸಿ, ತಕ್ಷಣವೇ ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಲಾಗಿದೆ.
ಮಳೆಯ ಮುನ್ಸೂಚನೆ ಹಾಗೂ ಬೆಳೆಗಳ ಸ್ಥಿತಿಗತಿಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಪರಿಸ್ಥಿತಿಯನ್ನು ಪ್ರತಿವಾರ ಪರಿಶೀಲಿಸುವುದನ್ನು ಮುಂದುವರಿಸಲಿದೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಷ್ಟದ ಈ ಸಂದರ್ಭದಲ್ಲಿ ಕರ್ನಾಟಕದ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ. ರೈತರು ಯಾವುದೇ ಆತಂಕ ಪಡಬೇಕಿಲ್ಲ. ಸರ್ಕಾರ ನಿಮ್ಮೊಂದಿಗೆ ಇದ್ದು, ಈ ಕಷ್ಟದ ಅವಧಿಯಲ್ಲಿ ಸದಾ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

