ಧಾರವಾಡ: ನಗರದ ಸಪ್ತಾಪೂರ ರಸ್ತೆಯಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಯುದ್ಧದಲ್ಲಿ ಮಡಿದ ಯೋಧರ ಹಾಗೂ ಮಾಜಿ ಸೈನಿಕರ ಪುತ್ರಿಯರಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಯರು ಹಾಗೂ ರಾಜ್ಯದ ಇತರ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 5ನೇ ತರಗತಿಯಿಂದ ಪಿಯುಸಿ ದ್ವಿತೀಯ ವರ್ಷದವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಇಲ್ಲಿ ಪ್ರವೇಶಾವಕಾಶವಿದ್ದು, ಆಯ್ಕೆಯಾದವರಿಗೆ ಉಚಿತ ವಾಸ್ತವ್ಯ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಧಾರವಾಡ ನಗರದ ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರಬೇಕು. ಆಸಕ್ತರು ಅರ್ಜಿ ನಮೂನೆಗಳನ್ನು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 5, 2026ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಹಾಗೂ ಮಾಜಿ ಸೈನಿಕರ ಕುಟುಂಬದವರು ಕಚೇರಿ ಅವಧಿಯಲ್ಲಿ ದೂರವಾಣಿ ಸಂಖ್ಯೆ 0836-2440176 ಅನ್ನು ಸಂಪರ್ಕಿಸಬಹುದಾಗಿದೆ.

