
ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳು ಎಂಬ ಶಂಕೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ
ಹರಿಯಾಣ: ಅಕ್ರಮ ಸಂಬಂಧಕ್ಕೆ ಪತ್ನಿ ಅಡ್ಡಿಯಾಗಬಹುದು ಎಂಬ ಶಂಕೆಯಿಂದ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಂಕಿತ್ (25) ಮಾನೇಸರ್ ನಿವಾಸಿಯಾಗಿದ್ದು, ತಂಬಾಕು ಅಂಗಡಿ ನಡೆಸುತ್ತಿದ್ದಾನೆ. ಈತನಿಗೆ ಕಳೆದ ಮೂರು ವರ್ಷಗಳಿಂದ 38 ವರ್ಷದ ರಜನಿ ದೇವಿ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ರಜನಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದಳು. ಈ ಸಂಬಂಧ ಮುಂದುವರಿದಿದ್ದರೂ, ಅಂಕಿತ್ ಕಳೆದ ಫೆಬ್ರವರಿಯಲ್ಲಿ 22 ವರ್ಷದ ಯುವತಿಯನ್ನು ವಿವಾಹವಾಗಿದ್ದ.
ಮದುವೆಯಾದ ಬಳಿಕವೂ ರಜನಿಯೊಂದಿಗಿನ ಸಂಬಂಧವನ್ನು ಮುಂದುವರಿಸಿದ್ದ ಅಂಕಿತ್, ತನ್ನ ಪತ್ನಿ ಈ ಸಂಬಂಧಕ್ಕೆ ಅಡ್ಡಿಯಾಗಬಹುದು ಎಂದು ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರೂ ಸೇರಿ ಆಕೆಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಹತ್ಯೆ ನಡೆಸುವ ಉದ್ದೇಶದಿಂದ ಎರಡು ತಿಂಗಳ ಹಿಂದೆಯೇ ಉತ್ತರ ಪ್ರದೇಶದಿಂದ ಅಕ್ರಮವಾಗಿ ಪಿಸ್ತೂಲ್ ಖರೀದಿಸಲಾಗಿತ್ತು. ಮೇ 21ರಂದು ಅಂಕಿತ್ ತನ್ನ ಪತ್ನಿಯನ್ನು ಬಾಡಿಗೆ ಮನೆಗೆ ಕರೆದೊಯ್ದು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಅಲ್ಲೇ ಬಿಟ್ಟು, ರಜನಿಯೊಂದಿಗೆ ಹರಿದ್ವಾರದ ಮಾರ್ಗವಾಗಿ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 22ರಂದು ಮೃತ ಯುವತಿಯ ತಾಯಿ ತನ್ನ ಮಗಳು ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮಾನೇಸರ್ನ ಬಾಡಿಗೆ ಮನೆಯಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದ ನವವಧುವಿನ ಮೃತದೇಹವನ್ನು ಪತ್ತೆಹಚ್ಚಿದ್ದರು. ತನಿಖೆಯಲ್ಲಿ ಅಂಕಿತ್ ಪ್ರಮುಖ ಆರೋಪಿ ಎಂಬುದು ದೃಢಪಟ್ಟ ಬಳಿಕ ಕ್ರೈಂ ಬ್ರಾಂಚ್ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.
ಜೂನ್ 30ರಂದು ಆರೋಪಿಗಳಿಬ್ಬರೂ ನೇಪಾಳದಿಂದ ಭಾರತಕ್ಕೆ ಮರಳುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅಂಕಿತ್ ಹಾಗೂ ರಜನಿ ದೇವಿಯನ್ನು ಬಂಧಿಸಿದ್ದಾರೆ.
ಪ್ರಸ್ತುತ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

