
ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚಿಂತಾಮಣಿ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11, 2026ರಂದು ಚಿಂತಾಮಣಿಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಹಾಗೂ ಸಾಹಿತಿ ಸು.ಶಿ. ಶಾಂತಕುಮಾರ್ ಹರವೆ ಅವರು ಆಯ್ಕೆಯಾಗಿದ್ದಾರೆ.
ಈ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದು, ಮೈಸೂರಿನ ಪ್ರತಿನಿಧಿಯಾಗಿ ಸು.ಶಿ. ಶಾಂತಕುಮಾರ್ ಹರವೆ ಅವರು ಭಾಗವಹಿಸಿ ತಮ್ಮ ಕವನವನ್ನು ವಾಚಿಸಲಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರ ನಿರಂತರ ಸೇವೆ ಹಾಗೂ ಸೃಜನಶೀಲ ಬರವಣಿಗೆಯನ್ನು ಪರಿಗಣಿಸಿ ಅವರಿಗೆ ಈ ಅವಕಾಶ ದೊರೆತಿದೆ.
ಕಾರ್ಯಕ್ರಮವನ್ನು ಮಾಜಿ ಉನ್ನತ ಶಿಕ್ಷಣ ಸಚಿವರು ಹಾಗೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಎಂ.ಸಿ. ಸುಧಾಕರ್ ಉದ್ಘಾಟಿಸಲಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ. ಕುಸುಮ ಮಂಗಳ ಡಿ.ವಿ. ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯಮಟ್ಟದ ಕವಿಗೋಷ್ಠಿಗೆ ಸು.ಶಿ. ಶಾಂತಕುಮಾರ್ ಹರವೆ ಅವರು ಆಯ್ಕೆಯಾಗಿರುವ ವಿಷಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸನ್ ಎನ್.ವಿ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆಯ್ಕೆಗೆ ಸಾಹಿತ್ಯ ವಲಯದಿಂದ ಹರ್ಷ ವ್ಯಕ್ತವಾಗಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

