
ಹನೂರು: ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇನೆ. ಶೂಟ್ಔಟ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡ ನಿಶಾಂತ್ ಸ್ಪಷ್ಟಪಡಿಸಿದರು.
ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೂಟ್ಔಟ್ ಪ್ರಕರಣವನ್ನು ವಿರೋಧಿಸಿ ಹನೂರು ಪಟ್ಟಣದಲ್ಲಿ ನಡೆದ ಬಂದ್ನಲ್ಲಿ ಕನ್ನಡಪರ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ, ಡಿಎಸ್ಎಸ್, ಬಿಎಸ್ಪಿ, ಕೆಆರ್ಎಸ್, ಮಾನವ ಹಕ್ಕುಗಳ ಆಯೋಗ ಸೇರಿದಂತೆ ಹಲವು ಸಂಘಟನೆಗಳು ಭಾಗವಹಿಸಿದ್ದವು. ತಾವು ಪಕ್ಷದ ವತಿಯಿಂದ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ. ಮಾನವೀಯತೆಯ ದೃಷ್ಟಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.
ರಾಜಕೀಯವನ್ನು ರಾಜಕೀಯವಾಗಿಯೇ ಮಾಡುತ್ತೇನೆ. ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ಮಂಜುನಾಥ್ ಅವರು ಪಕ್ಷಾತೀತವಾಗಿ ವಿಧಾನಸೌಧಕ್ಕೆ ಎಲ್ಲರನ್ನು ಕರೆದುಕೊಂಡು ಹೋದರೆ, ನಾವೂ ಬಂದು ಕೈಜೋಡಿಸುತ್ತೇವೆ ಎಂದು ತಿಳಿಸಿದ್ದೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹೋರಾಟ ನಡೆಸಬೇಕಾದರೆ ಬೇರೆಯವರೊಂದಿಗೆ ಸೇರಿ ಹೋರಾಟ ಮಾಡುವ ಅವಶ್ಯಕತೆ ನಮಗಿಲ್ಲ. ಹೋರಾಟ ಮಾಡುವ ಶಕ್ತಿ ನಮ್ಮಲ್ಲಿದೆ. ಇದನ್ನು ಹಲವು ಬಾರಿ ಸಾಬೀತುಪಡಿಸಿದ್ದೇವೆ ಎಂದು ನಿಶಾಂತ್ ಹೇಳಿದರು.
ಮಾರ್ಟಳ್ಳಿ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ವ್ಯರ್ಥವಾಗಿ ಹರಿದು ಹೋಗುತ್ತಿರುವ ಮಳೆ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಚೆಕ್ಡ್ಯಾಂಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. ಅಲ್ಲದೆ, ಹಲವು ಡ್ಯಾಂಗಳಲ್ಲಿನ ಹೂಳು ತೆಗೆಸುವ ಕಾರ್ಯವನ್ನೂ ಮಾಡಲಾಗಿದೆ. ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಗಾಗಿ ರೈತರೊಂದಿಗೆ 153 ದಿನಗಳ ಕಾಲ ಹೋರಾಟ ನಡೆಸಿದ್ದೇನೆ ಎಂದು ಅವರು ತಿಳಿಸಿದರು.
ತಮ್ಮ ಏಳಿಗೆಯನ್ನು ಸಹಿಸದ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಮುಂದಿನ ದಿನಗಳಲ್ಲಿ ಹನೂರು ಕ್ಷೇತ್ರದ ಅಭಿವೃದ್ಧಿಯ ಮೂಲಕವೇ ಉತ್ತರ ನೀಡುತ್ತೇನೆ. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ತೋರಿಸುವುದಾಗಿ ನಿಶಾಂತ್ ವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಕಾರ್ತಿಕ್ ಗೌಡ, ಹನೂರು

