
ಧಾರವಾಡ: ಜಿಲ್ಲೆಯಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಕುಟುಂಬಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ. ಪ್ರತಿ ಮನೆಯೂ ಈ ಮಹತ್ವದ ಸಮೀಕ್ಷೆಯಲ್ಲಿ ಭಾಗವಹಿಸಿ, ಅಗತ್ಯ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ, ಸಮೀಕ್ಷೆ ನಡೆಸಲಿರುವವರಿಗೆ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆಗಾಗಿ ಗುರುತಿಸಲಾದ ಮನೆಗಳಿಗೆ ಸ್ಟಿಕ್ಕರ್ಗಳನ್ನು ಸಹ ಅಂಟಿಸಲಾಗಿದೆ. ಸಮೀಕ್ಷೆ ಪೂರ್ಣಗೊಳ್ಳುವವರೆಗೂ ಈ ಸ್ಟಿಕ್ಕರ್ಗಳನ್ನು ತೆಗೆಯಬಾರದು ಎಂದು ಅವರು ಸೂಚಿಸಿದ್ದಾರೆ.
ಪರಿಪೂರ್ಣ ಮಾಹಿತಿ ಅಗತ್ಯ
ಸಮೀಕ್ಷೆದಾರರು ಮನೆಗೆ ಭೇಟಿ ನೀಡಿದಾಗ, ಕುಟುಂಬದ ಎಲ್ಲ ಸದಸ್ಯರ ಶಿಕ್ಷಣ, ಉದ್ಯೋಗ ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ನಿಖರ ಮಾಹಿತಿ ನೀಡಬೇಕು. ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳಿದ್ದರೆ, ಪ್ರತಿಯೊಂದು ಪಡಿತರ ಚೀಟಿಗೂ ಪ್ರತ್ಯೇಕ ಕುಟುಂಬವೆಂದು ಪರಿಗಣಿಸಿ ಸಮೀಕ್ಷೆ ನಡೆಸಲಾಗುತ್ತದೆ.
ಜಿಲ್ಲೆಯಲ್ಲಿ ಒಟ್ಟು 5,46,012 ಕುಟುಂಬಗಳ ಸಮೀಕ್ಷೆ ನಡೆಸುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕಾಗಿ 4,880 ಗಣತಿದಾರರನ್ನು ನಿಯೋಜಿಸಲಾಗಿದ್ದು, ಒಬ್ಬರು ಗರಿಷ್ಠ 150 ಕುಟುಂಬಗಳಿಗೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಈ ಸಮೀಕ್ಷೆ ನಡೆಯಲಿದೆ.
ಸಾರ್ವಜನಿಕರು ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡುವ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಡೆಸುತ್ತಿರುವ ಈ ಪ್ರಮುಖ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
(ಚಿತ್ರ ಶೀರ್ಷಿಕೆ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ, ಸೆ.22ರಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಿದ್ಧತೆಯಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಗಣತಿದಾರರು ತೊಡಗಿರುವುದು.)

