
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮಹತ್ವದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಕಾರ್ಯವು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಕಾರಣ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 18ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22 ರಿಂದ ಶುರುವಾಗಿತ್ತು. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘವು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರವು, ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ ಘೋಷಿಸಿ, ಒಟ್ಟು 8 ಕೆಲಸದ ದಿನಗಳ ಹೆಚ್ಚುವರಿ ಕಾಲಾವಕಾಶವನ್ನು ಸಮೀಕ್ಷಾ ಕಾರ್ಯಕ್ಕೆ ಒದಗಿಸಿದೆ.
ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ
ಅಕ್ಟೋಬರ್ 12 ರಿಂದ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳು ನಡೆಯುವುದರಿಂದ, ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಲಾಗಿದೆ. ಪರೀಕ್ಷಾ ಕಾರ್ಯಗಳಿಗೆ ಅಡಚಣೆಯಾಗದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

