
ಮಹಾರಾಷ್ಟ್ರದ: ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆ ಕೈ ಮೇಲೆ ಬರೆದ ‘ಡೆತ್ ನೋಟ್’ (ಮರಣಪತ್ರ) ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಐದು ತಿಂಗಳ ಅವಧಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಒಬ್ಬರು ತನ್ನ ಮೇಲೆ ಸರಣಿ ಅತ್ಯಾಚಾರ ಎಸಗಿದ್ದಾರೆ ಎಂದು ವೈದ್ಯೆ ಆರೋಪಿಸಿ ಸಾವಿಗೆ ಶರಣಾಗಿದ್ದಾರೆ.
ಕೈ ಮೇಲೆ ಡೆತ್ ನೋಟ್ ಬರೆದ ವೈದ್ಯೆ:
ಸತಾರಾ ಜಿಲ್ಲೆಯ ಫಲಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆ, ಗುರುವಾರ (ಅಕ್ಟೋಬರ್ 23,) ರಾತ್ರಿ ಸ್ಥಳೀಯ ಹೋಟೆಲ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ತನ್ನ ಕೈಯ ಅಂಗೈ ಮೇಲೆ ಮರಣಪತ್ರವನ್ನು ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ನೇರ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ.
ಮರಣಪತ್ರದಲ್ಲಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಗೋಪಾಲ್ ಬದಾನೆ ಎಂಬುವವರು ಕಳೆದ ಐದು ತಿಂಗಳಲ್ಲಿ ತನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಬದಾನೆ ಜೊತೆಗೆ ಪ್ರಶಾಂತ್ ಬಾಂಕರ್ ಎಂಬ ಇನ್ನೊಬ್ಬ ವ್ಯಕ್ತಿಯ ಹೆಸರು ಸಹ ಉಲ್ಲೇಖಿಸಲಾಗಿದ್ದು, ಇವರು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಬರೆಯಲಾಗಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಮಾನತು:
ಈ ಆಘಾತಕಾರಿ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ತಕ್ಷಣ ಸತಾರಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿ, ಆರೋಪಿತ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಸತಾರಾ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಶಿ ಅವರು ಮಾತನಾಡಿ, “ವೈದ್ಯೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ನಲ್ಲಿ ಹೆಸರಿಸಲಾದ ಪೊಲೀಸ್ ಅಧಿಕಾರಿ ಗೋಪಾಲ್ ಬದಾನೆ ಅವರನ್ನು ತಕ್ಷಣವೇ ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ರೇಪ್ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು:
ಸಂತ್ರಸ್ತ ವೈದ್ಯೆಯ ಕುಟುಂಬಸ್ಥರು ದೂರು ನೀಡಿದ ಬೆನ್ನಲ್ಲೇ, ಪಿಎಸ್ಐ ಗೋಪಾಲ್ ಬದಾನೆ ಮತ್ತು ಪ್ರಶಾಂತ್ ಬಾಂಕರ್ ವಿರುದ್ಧ ಅತ್ಯಾಚಾರ (IPC ಸೆಕ್ಷನ್ 376) ಮತ್ತು ಆತ್ಮಹತ್ಯೆಗೆ ಪ್ರಚೋದನೆ (IPC ಸೆಕ್ಷನ್ 306) ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವೈದ್ಯೆಗೆ ನ್ಯಾಯ ಒದಗಿಸಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಂತ್ರಸ್ತೆಯ ಸಂಬಂಧಿಕರು ಒತ್ತಾಯಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದು ಎಸ್ಪಿ ದೋಶಿ ಭರವಸೆ ನೀಡಿದ್ದಾರೆ.

