
ಧರ್ಮಸ್ಥಳದ ಕುರಿತು ಅಪಪ್ರಚಾರ: ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಚಾಲನೆ
ಬೆಂಗಳೂರು: ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಭಕ್ತರು ಶ್ರೀಕ್ಷೇತ್ರದತ್ತ ಪ್ರಯಾಣ ಆರಂಭಿಸಿದರು.
ಬೆಳಗ್ಗೆ 6:30ಕ್ಕೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿನ ನಿತ್ಯೋತ್ಸವದ ಬಳಿ ಶಾಸಕ ಎಸ್. ಆರ್. ವಿಶ್ವನಾಥ್ ಅವರು ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಅಪಪ್ರಚಾರ ಮಾಡುವವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಭಕ್ತರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ.
ವಿಶೇಷ ದರ್ಶನ ಮತ್ತು ಸಂಕಲ್ಪ
ಇದೇ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಪಕ್ಷದ ಪ್ರಮುಖ ಶಾಸಕರು ಮತ್ತು ಹಿರಿಯ ನಾಯಕರೊಂದಿಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಧರ್ಮಸ್ಥಳದ ಮೇಲೆ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಅವರಿಗೆ ತಕ್ಕ ಪಾಠವಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ‘ಧರ್ಮಸ್ಥಳ ಚಲೋ’ ಅಭಿಯಾನವು ಧರ್ಮಸ್ಥಳದ ಪಾವಿತ್ರ್ಯತೆ ಮತ್ತು ಸತ್ಯವನ್ನು ಎತ್ತಿಹಿಡಿಯುವ ಪ್ರಯತ್ನವಾಗಿದೆ ಎಂದು ಶಾಸಕ ವಿಶ್ವನಾಥ್ ತಿಳಿಸಿದ್ದಾರೆ. ಭಕ್ತರು ಸಂಜೆ ವೇಳೆಗೆ ಧರ್ಮಸ್ಥಳ ತಲುಪಿ, ಮಂಜುನಾಥ ಸ್ವಾಮಿಯ ವಿಶೇಷ ದರ್ಶನ ಪಡೆಯುವ ನಿರೀಕ್ಷೆಯಿದೆ.

