

ಧರ್ಮಸ್ಥಳ ಪ್ರಕರಣ: ಸರ್ಕಾರ ತಕ್ಷಣ ಮಧ್ಯಂತರ ವರದಿ ಮಂಡಿಸಿ, ದೂರುದಾರರನ್ನು ಬಂಧಿಸಲಿ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೂಡಲೇ ಅಧಿವೇಶನದಲ್ಲಿ ಮಧ್ಯಂತರ ವರದಿಯನ್ನು ಮಂಡಿಸಬೇಕು ಮತ್ತು ಅನಾಮಿಕ ದೂರುದಾರನನ್ನು ತಕ್ಷಣ ಬಂಧಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ.
ಅವರು ಶನಿವಾರದಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಹಿಂದೆ ಷಡ್ಯಂತ್ರವಿದೆ ಎಂದು ಸ್ವತಃ ಉಪ ಮುಖ್ಯಮಂತ್ರಿಗಳೇ ಹೇಳಿಕೆ ನೀಡಿದ್ದಾರೆ. ಹಾಗಾದರೆ, ಇದು ಗೃಹ ಇಲಾಖೆಯ ವೈಫಲ್ಯವೇ ಅಥವಾ ಮುಖ್ಯಮಂತ್ರಿಗಳೇ ಖುದ್ದು ಇದರ ತನಿಖೆಯನ್ನು ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆ ಮತ್ತು ಅಸ್ಮಿತೆಗೆ ವ್ಯವಸ್ಥಿತವಾಗಿ ಧಕ್ಕೆ ತರುವ ಉದ್ದೇಶದಿಂದಲೇ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಪೊಲೀಸರು ಇದುವರೆಗೆ ಅನಾಮಿಕ ದೂರುದಾರರನ್ನು ಏಕೆ ಬಂಧಿಸಿಲ್ಲ ಎಂದು ಕೇಂದ್ರ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದೂರುದಾರರ ಹಿನ್ನೆಲೆ, ಜಾತಿ ಮತ್ತು ಧರ್ಮದ ಬಗ್ಗೆ ತನಿಖೆ ನಡೆಸಬೇಕು. ಒಂದು ವೇಳೆ ಬೇರೆ ಧರ್ಮದವರಾಗಿದ್ದರೆ, ಅದು ಹಿಂದೂಗಳ ಧಾರ್ಮಿಕ ಭಾವನೆಗಳೊಂದಿಗೆ ಚೆಲ್ಲಾಟವಾಡಿದಂತೆ ಆಗುತ್ತದೆ ಎಂದು ಹರಿಹಾಯ್ದರು.
ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

