ನವೆಂಬರ್ 26ಕ್ಕೆ ಸಂವಿಧಾನ ದಿನ ಆಚರಣೆ: ಧಾರವಾಡದಲ್ಲಿ ಜಾಥಾ, ವಿಶೇಷ ಉಪನ್ಯಾಸ

Spread the love

ಧಾರವಾಡ, ನ. 24 : ಪ್ರತಿ ವರ್ಷದಂತೆ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸಲು ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡ ಬೃಹತ್ ಜಾಥಾ ಮತ್ತು ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸಲಿದ್ದಾರೆ. ಅಲ್ಲದೆ, ಜಾಥಾದುದ್ದಕ್ಕೂ ಡಾ|| ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಕುರಿತ ಪ್ರಮುಖ ವ್ಯಾಖ್ಯೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಲಾಗಿದೆ.

​ನವೆಂಬರ್ 26, 2025ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಆರಂಭವಾಗಲಿದೆ. ಇದು ಕೋರ್ಟ್ ಸರ್ಕಲ್, ಆಲೂರು ವೆಂಕಟರಾವ್ ವೃತ್ತ (ಜುಬ್ಲಿ ಸರ್ಕಲ್) ಮಾರ್ಗವಾಗಿ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಸಾಗಲಿದೆ. ನಂತರ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.

​ಬೆಳಿಗ್ಗೆ 10:30 ಗಂಟೆಗೆ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವುದು.

​ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *