
ಕುಂದಗೋಳ: ತಾಲೂಕಿನ ಹಿರೇನರ್ತಿ, ಬೆನಕನಹಳ್ಳಿ ಹಾಗೂ ಬಸಾಪೂರ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಮಲಪ್ರಭಾ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತೀವ್ರ ಸಮಸ್ಯೆಯಿಂದ ಗ್ರಾಮಸ್ಥರ ಜೀವನ ಅಸ್ತವ್ಯಸ್ತಗೊಂಡಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ಸೋಮವಾರ ತಾಲೂಕು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಶಿರಸ್ತೇದಾರ್ ಮಹೇಶ್ ಶ್ಯಾಮನಾಳ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಳೆದ ಎರಡು ವಾರಗಳಿಂದ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಗ್ರಾಮಗಳಲ್ಲಿ ಸ್ಥಾಪಿಸಲಾಗಿರುವ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು (ಆರ್ಒ) ಕೂಡ ಕೆಟ್ಟು ನಿಂತಿರುವುದರಿಂದ ಜನರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ನೀರಿನ ಪೂರೈಕೆಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ, ‘ಮೋಟರ್ ಕೆಟ್ಟಿದೆ’ ಎಂಬ ಹಾರಿಕೆ ಉತ್ತರ ನೀಡುತ್ತಾ ಕಾಲಹರಣ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಅಡುಗೆ, ಸ್ನಾನ ಹಾಗೂ ಕುಡಿಯುವ ನೀರಿಗಾಗಿ ಮಹಿಳೆಯರು ಮತ್ತು ಮಕ್ಕಳು ಮೈಲುಗಟ್ಟಲೆ ನಡೆದು ಪಕ್ಕದ ಊರುಗಳಿಂದ ನೀರು ಹೊತ್ತು ತರುವಂತ ದುಸ್ಥಿತಿ ಎದುರಾಗಿದೆ. ತಾಲೂಕು ಆಡಳಿತವು ಕೂಡಲೇ ಎಚ್ಚೆತ್ತುಕೊಂಡು ಸ್ಥಗಿತಗೊಂಡಿರುವ ನೀರು ಪೂರೈಕೆಯನ್ನು ಸರಿಪಡಿಸದಿದ್ದರೆ, ಮುಂಬರುವ ದಿನಗಳಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಮುಖಂಡ ಕಲ್ಲಪ್ಪ ಹರಕುಣಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಗುರುಸಿದ್ದಗೌಡ ಮೇಳಮಾಳಗಿ ಮಾತನಾಡಿ, ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ನೀರಿನ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಮೌನ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಿದರು. ಹಾಗಾಗಿ ತಕ್ಷಣವೇ ನೀರಿನ ವ್ಯವಸ್ಥೆ ಸರಿಪಡಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಲ್ಲಪ್ಪ ಹರಕುಣಿ, ಮಂಜುನಾಥ ಕುಂಬಾರ, ಶಿವು ಮೇಳಮಾಳಗಿ, ರಮೇಶ್ ಹಡಪನವರ, ಮುತ್ತು ಹಿರೇಮಠ, ದಾವಲಸಾಬ ದೊಡಮನಿ, ಚಂದ್ರು ನಾಯ್ಕರ, ಮಂಜು ಬಡಿಗೇರ, ರಾಮಣ್ಣ ಪೂಜಾರ, ವೆಂಕನಗೌಡ ಕಂಠೇಪ್ಪಗೌಡ್ರ, ಬಸವರಾಜ ಯೋಗಪ್ಪನವರ, ಗ್ರಾಮದ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದು,

