ಧಾರವಾಡ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ನನ್ನ ಬೆಳೆ ನನ್ನ ಹಕ್ಕು’ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಸ್ವತಃ ತಾವೇ ಮೊಬೈಲ್ ಆ್ಯಪ್ ಮೂಲಕ ದಾಖಲಿಸಲು ಕೃಷಿ ಇಲಾಖೆ ಅವಕಾಶ ಕಲ್ಪಿಸಿದೆ.
ಆ್ಯಪ್ ಮೂಲಕ ವಿವರ ದಾಖಲಿಸಲು ಅವಕಾಶ:
ರೈತರು ಗೂಗಲ್ ಪ್ಲೇ ಸ್ಟೋರ್ನಿಂದ ‘ಹಿಂಗಾರು ರೈತರ ಬೆಳೆ ಸಮೀಕ್ಷೆ 2025-26’ ಎಂಬ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು, ಜನೆವರಿ 15, 2026 ರೊಳಗಾಗಿ ಬೆಳೆ ವಿವರಗಳನ್ನು ಅಪ್ಲೋಡ್ ಮಾಡಬೇಕು. ಆ್ಯಪ್ ಬಳಸಲು ತಾಂತ್ರಿಕ ತೊಂದರೆ ಎದುರಾದಲ್ಲಿ ರೈತರಿಗೆ ಸಹಾಯ ಮಾಡಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಇವರು ನಡೆಸುವ ಸಮೀಕ್ಷೆ ಕಾರ್ಯವು ಜನೆವರಿ 30ಕ್ಕೆ ಪೂರ್ಣಗೊಳ್ಳಲಿದ್ದು, ಒಂದು ವೇಳೆ ಅವರು ದಾಖಲಿಸಿದ ಮಾಹಿತಿ ತಪ್ಪಾಗಿದ್ದಲ್ಲಿ ಫೆಬ್ರವರಿ 15ರೊಳಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಅವಕಾಶ ನೀಡಲಾಗಿದೆ.
ನಿಖರ ಸಮೀಕ್ಷೆಯ ಮಹತ್ವ:
ಸಹಾಯಕ ಕೃಷಿ ನಿರ್ದೇಶಕರಾದ ರಾಜಶೇಖರ ಅಣಗೌಡರ ಅವರು ಮಾತನಾಡಿ, ಬೆಳೆ ಸಮೀಕ್ಷೆಯ ಮಾಹಿತಿಯು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ ಪರಿಶೀಲನೆ, ಅತಿವೃಷ್ಟಿ ಅಥವಾ ಅನಾವೃಷ್ಟಿ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರ ವಿತರಿಸಲು ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ರೈತರು ನಿಖರವಾದ ಮಾಹಿತಿಯನ್ನು ದಾಖಲಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ತಾಂತ್ರಿಕ ಮಾಹಿತಿ ಹಾಗೂ ಸಹಾಯಕ್ಕಾಗಿ ರೈತರು ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

