
ಕುಂದಗೋಳ: ತಾಲ್ಲೂಕಿನ ಕಮಡೊಳ್ಳಿ ಮತ್ತು ಚಿಕ್ಕಹರಕುಣಿ ಗ್ರಾಮಗಳ ಮಧ್ಯೆ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ ತಳವಾರ್ (47) ಮೃತಪಟ್ಟಿದ್ದಾರೆ.
ಶುಕ್ರವಾರದಂದು ಕಮಡೊಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಜಗದೀಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಸಾರಿಗೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

