
ಭಾಲ್ಕಿ: ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಗಳಾದ ವಿಶ್ವನಾಥ (50) ಹಾಗೂ ಅವರ ಪುತ್ರ ಅಮರೇಶ (23) ಮೃತಪಟ್ಟ ದುರ್ದೈವಿಗಳು.
ಕಾರಂಜಾ ಜಲಾಶಯದ ಕಾಲುವೆ ಪಕ್ಕದಲ್ಲಿ ಸಂಚರಿಸುತ್ತಿದ್ದಾಗ ಈ ಆಕಸ್ಮಿಕ ನಡೆದಿದೆ ಎಂದು ತಿಳಿದುಬಂದಿದೆ. ಕಾಲುವೆಗೆ ಬಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವುದು ಹಳ್ಳಿಖೇಡ್ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

