ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ವಿತರಿಸಲು ಸಿದ್ಧವಾಗುತ್ತಿರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ ಕಾರ್ಯದರ್ಶಿಯವರು, ಪ್ರಸಾದದ ಶುಚಿತ್ವ ಹಾಗೂ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು. ಭಕ್ತಾದಿಗಳಿಗೆ ಗುಣಮಟ್ಟದ ಪ್ರಸಾದ ಸಿಗುವಂತೆ ನೋಡಿಕೊಳ್ಳಲು ಸಿಬ್ಬಂದಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು ಜಾತ್ರೆಯ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದರು.
ವರದಿ: ಕಾರ್ತಿಕ್ ಗೌಡ, ಹನೂರು.

