
ಬೆಂಗಳೂರು: ರಾಜ್ಯಾದ್ಯಂತ ಯುಗಾದಿ ಹಬ್ಬದ ಸಡಗರ ಮನೆಮಾಡಿರುವ ಬೆನ್ನಲ್ಲೇ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ಶಾಕ್ ನೀಡಿದೆ. ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕೇಳಲಾದ ಬಾಕಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿದ್ಧಪಡಿಸಬೇಕಾದ ಅನಿವಾರ್ಯತೆ ಇರುವುದರಿಂದ, ಮಾರ್ಚ್ 19ರ ಯುಗಾದಿ ಹಬ್ಬದ ದಿನದಂದೂ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದು ಹಬ್ಬದ ರಜೆಯ ನಿರೀಕ್ಷೆಯಲ್ಲಿದ್ದ ಸಿಬ್ಬಂದಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಈವರೆಗೆ ಸರಿಯಾದ ಉತ್ತರ ಲಭ್ಯವಾಗಿಲ್ಲದ ಕಾರಣ ಸ್ವತಃ ಸಭಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಐಎಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಇಲಾಖೆಯ ಹಿರಿಯ ಅಧಿಕಾರಿಗಳು ಈ ತ್ವರಿತ ಕ್ರಮ ಕೈಗೊಂಡಿದ್ದಾರೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರ ನಿರ್ದೇಶನದಂತೆ, ಮಾರ್ಚ್ 23ರಂದು ನಡೆಯಲಿರುವ ಚರ್ಚೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಉಪ ಕಾರ್ಯದರ್ಶಿ ಕಲಾವತಿ ಎಸ್.ಎನ್. ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮುಜರಾಯಿ, ಭೂ ಮಂಜೂರಾತಿ, ಭೂ ಕಂದಾಯ ಹಾಗೂ ಭೂ ಸುಧಾರಣಾ ಕೋಶ ಸೇರಿದಂತೆ ಒಟ್ಟು ಒಂಬತ್ತು ಪ್ರಮುಖ ಶಾಖೆಗಳ ಸಿಬ್ಬಂದಿಗೆ ಈ ಸೂಚನೆ ಅನ್ವಯವಾಗಲಿದೆ.
ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗುವಂತೆ ಮಾಡಿರುವ ಈ ಆದೇಶಕ್ಕೆ ಸಿಬ್ಬಂದಿ ವರ್ಗದಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವರ್ಷಕ್ಕೊಮ್ಮೆ ಬರುವ ಹೊಸ ವರ್ಷದ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಬೇಕಾದ ಸಂದರ್ಭದಲ್ಲಿ ಕೆಲಸಕ್ಕೆ ಕರೆಸಿರುವುದು ಅಮಾನವೀಯ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯ ಕಲಾಪಕ್ಕೆ ಆದ್ಯತೆ ನೀಡುವುದು ಮುಖ್ಯವಾದರೂ, ಹಬ್ಬದ ದಿನವೇ ಕಡ್ಡಾಯ ಹಾಜರಾತಿ ಘೋಷಿಸಿರುವುದು ನೌಕರರ ಹಬ್ಬದ ಸಂಭ್ರಮವನ್ನು ಕಿತ್ತುಕೊಂಡಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

