
ಅಹಮದಾಬಾದ್ನ: ಖಾಸಗಿ ಶಾಲೆಯೊಂದರ ಹೊರಗೆ 10ನೇ ತರಗತಿಯ ವಿದ್ಯಾರ್ಥಿಯನ್ನು 9ನೇ ತರಗತಿಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ. ಈ ಕೃತ್ಯದ ಬಳಿಕ ಶಾಲೆಯ ಮುಂದೆ ಬೃಹತ್ ಪ್ರತಿಭಟನೆ ಭುಗಿಲೆದ್ದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಹತ್ಯೆಗೊಳಗಾದ 15 ವರ್ಷದ ವಿದ್ಯಾರ್ಥಿಯು ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ನಡೆದ ಕೂಡಲೇ, ಸಿಂಧಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯ ಹತ್ಯೆ ಸುದ್ದಿ ತಿಳಿದು, ಸಮುದಾಯದ ನೂರಾರು ಸದಸ್ಯರು ಬೆಳಗ್ಗೆಯೇ ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಆರೋಪಿ ವಿದ್ಯಾರ್ಥಿ ಮುಸ್ಲಿಂ ಸಮುದಾಯಕ್ಕೆ ಸೇರಿರುವುದರಿಂದ ಈ ಪ್ರಕರಣವು ತಿವ್ರ ಸ್ವರೂಪ ಪಡೆದುಕೊಂಡಿದೆ.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಯ ಪೋಷಕರು, ಹಿಂದೂ ಸಂಘಟನೆಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಭಾಗವಹಿಸಿದ್ದು, ಶಾಲಾ ಆವರಣವನ್ನು ಧ್ವಂಸಗೊಳಿಸಿದ್ದಾರೆಂದು ವರದಿಯಾಗಿದೆ.
ಇದೇ ಸಂದರ್ಭದಲ್ಲಿ ಶಾಲಾ ಸಿಬ್ಬಂದಿಯ ಮೇಲೆ ಹಲ್ಲೆ ಕೂಡ ನಡೆಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಾಲೆಯ ಸುತ್ತಲೂ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆಯೂ ಸಣ್ಣಪುಟ್ಟ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.
ಆರೋಪಿ 9ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಾಪರಾಧಿ ಕಾನೂನಿನ ಅಡಿಯಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

