
ಬೆಂಗಳೂರು: ಶಾಸಕರಿಗೆ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ (CMIDP) ಅನುದಾನ ಹಂಚಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶಿವಯ್ಯ ಗುಡಗುಂಟಿ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ. ಈ ಅನುದಾನ ತಾರತಮ್ಯದ ಕಾನೂನು ಸಮರದ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಶಾಸಕ ಜಗದೀಶ ಶಿವಯ್ಯ ಗುಡಗುಂಟಿ ಅವರು ನ್ಯಾಯಪೀಠಕ್ಕೆ ನೀಡಿರುವ ವಿವರಣೆಯ ಪ್ರಕಾರ, ರಾಜ್ಯ ಸರ್ಕಾರವು ಸಿಎಂಐಡಿಪಿ ಯೋಜನೆಯಡಿ ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ₹ 50 ಕೋಟಿ ಅನುದಾನ ನಿಗದಿ ಮಾಡಿದೆ. ಆದರೆ, ವಿರೋಧ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಕೇವಲ ₹ 25 ಕೋಟಿ ಅನುದಾನವನ್ನು ಹಂಚಿಕೆ ಮಾಡುವ ಮೂಲಕ ಸರ್ಕಾರವು ರಾಜಕೀಯ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇತರ ಕ್ಷೇತ್ರಗಳಿಗೆ ನೀಡಿದಂತೆ ತಮ್ಮ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೂ ಸಮಾನವಾಗಿ ₹ 50 ಕೋಟಿ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ಅಲ್ಲದೆ, ಅರ್ಜಿ ಇತ್ಯರ್ಥವಾಗುವವರೆಗೆ ತಮ್ಮ ಮನವಿಯನ್ನು ಮರುಪರಿಗಣಿಸಿ ₹ 50 ಕೋಟಿ ಅನುದಾನ ಹಂಚಿಕೆ ಮಾಡಲು ಮಧ್ಯಂತರ ನಿರ್ದೇಶನ ನೀಡಬೇಕೆಂದೂ ಶಾಸಕರು ಮನವಿ ಮಾಡಿದ್ದಾರೆ.
ವಾದ-ಪ್ರತಿವಾದಗಳನ್ನು ಆಲಿಸಿದ ವಿಭಾಗೀಯ ಪೀಠವು ಅನುದಾನ ಹಂಚಿಕೆಯಲ್ಲಿನ ಈ ತಾರತಮ್ಯದ ಕುರಿತು ಸ್ಪಷ್ಟೀಕರಣ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಪ್ರತಿವಾದಿಗಳಿಗೆ ಈ ನೋಟಿಸ್ ನೀಡಲಾಗಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ. ಸರ್ಕಾರದ ಪ್ರತಿಕ್ರಿಯೆಗಾಗಿ ಹೈಕೋರ್ಟ್ ಕಾಯುತ್ತಿದ್ದು, ಶಾಸಕರಿಗೆ ಅನುದಾನ ಹಂಚಿಕೆ ವಿವಾದದ ಮುಂದಿನ ನಿರ್ಧಾರ ಕುತೂಹಲ ಕೆರಳಿಸಿದೆ.

