ಬಳ್ಳಾರಿ ಬ್ಯಾನರ್ ಘರ್ಷಣೆ: ಅಧಿಕಾರ ಸ್ವೀಕರಿಸಿದ ಎರಡೇ ದಿನಕ್ಕೆ ಎಸ್‌ಪಿ ಪವನ್ ನೆಟ್ಟೂರ್ ಅಮಾನತು

Spread the love

ಬಳ್ಳಾರಿ: ನಗರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬ್ಯಾನರ್ ಗಲಾಟೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪವನ್ ನೆಟ್ಟೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರ್ಕಾರ ಶುಕ್ರವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

​ವಿಶೇಷವೆಂದರೆ, ಬುಧವಾರವಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶದನ್ವಯ ಬಳ್ಳಾರಿಗೆ ನೇಮಕಗೊಂಡಿದ್ದ ನೆಟ್ಟೂರ್ ಅವರು ಗುರುವಾರ (ಜ. 1) ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ವಹಿಸಿಕೊಂಡ ಮೊದಲ ದಿನವೇ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ತೆರವು ವಿಚಾರವಾಗಿ ಉಭಯ ಪಕ್ಷಗಳ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ಸಂಭವಿಸಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು, ವರದಿ ನೀಡುವಂತೆ ಬಳ್ಳಾರಿ ವಲಯದ ಡಿಐಜಿಪಿ ವರ್ತಿಕಾ ಕಟಿಯಾರ್ ಅವರಿಗೆ ಸೂಚಿಸಿದ್ದರು.

​ಡಿಐಜಿಪಿ ಅವರು ಸಲ್ಲಿಸಿದ ವರದಿಯಲ್ಲಿ, “ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಹಾಗೂ ಘಟನೆಯ ಗಂಭೀರತೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸಕಾಲಕ್ಕೆ ಮಾಹಿತಿ ನೀಡುವಲ್ಲಿ ಎಸ್‌ಪಿ ಪವನ್ ನೆಟ್ಟೂರ್ ವಿಫಲರಾಗಿದ್ದಾರೆ” ಎಂದು ಉಲ್ಲೇಖಿಸಲಾಗಿತ್ತು. ಈ ವರದಿಯನ್ನು ಆಧರಿಸಿ ಸರ್ಕಾರ ಅಮಾನತು ಕ್ರಮ ಕೈಗೊಂಡಿದೆ. ಸದ್ಯ ಚಿತ್ರದುರ್ಗ ಜಿಲ್ಲಾ ಎಸ್‌ಪಿ ರಂಜಿತ್ ಕುಮಾರ್ ಭಂಡಾರಿ ಅವರಿಗೆ ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಉಸ್ತುವಾರಿಯನ್ನು ವಹಿಸಲಾಗಿದೆ.

Leave a Reply

Your email address will not be published. Required fields are marked *