
ಶಿಗ್ಗಾವಿ: ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರ-3ರಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬರ್ಬರ ಹತ್ಯೆ ಪ್ರಕರಣವು ಜನತೆಯನ್ನು ಬೆಚ್ಚಿಬೀಳಿಸಿದೆ. 29 ವರ್ಷದ ಅಂಗನವಾಡಿ ಕಾರ್ಯಕರ್ತೆ ಸುಮಾ ಶಿವಶಂಕರ ಸವಣೂರ (ಊರ್ಫ್ ವನಹಳ್ಳಿ) ಅವರನ್ನು ಅವರ ಸಹೋದರನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರ ಬೆಳಿಗ್ಗೆ ಸುಮಾ ಅವರು ಎಂದಿನಂತೆ ಅಂಗನವಾಡಿ ಕೇಂದ್ರ ತೆರೆಯಲು ಬಂದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಿಯರ ಹಾಗೂ ವೈಯಕ್ತಿಕ ಕಾರಣಗಳಿಂದ ಉಂಟಾದ ಕಲಹದ ಹಿನ್ನೆಲೆ ಆರೋಪಿ ಸಂಜು ಹರಿವಾಳ ಅವರು ಸುಮಾ ಅವರ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಶಿಗ್ಗಾವಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ, ಡಿವೈಎಸ್ಪಿ ಗುರುಶಾಂತಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಯಶೋಧಾ ವಂಟಗೋಡಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜು ಹರಿವಾಳನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹತ್ಯೆಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದರು.
ಅಂಗನವಾಡಿ ಕೇಂದ್ರದಲ್ಲೇ ಕಾರ್ಯಕರ್ತೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

