ಗ್ರಾಪಂ ಚುನಾವಣೆ ಮೀಸಲಾತಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the love

🏛️ ಗ್ರಾಪಂ ಚುನಾವಣೆ ಮೀಸಲಾತಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆ, ಚುನಾವಣೆಗೆ ಅಗತ್ಯವಿರುವ ಸೀಟುಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ (SEC) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಾಲಯವು, ಈ ವಿಷಯವನ್ನು “ಗಂಭೀರ” ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರನ್ನೊಳಗೊಂಡ ವಿಭಾಗೀಯ ಪೀಠವು ಎರಡು ವಾರಗಳೊಳಗೆ ಸೂಕ್ತ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಡಿಸೆಂಬರ್ 11ರೊಳಗೆ ಸರ್ಕಾರ ತನ್ನ ಪ್ರತಿಕ್ರಿಯೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.

ರಾಜ್ಯ ಚುನಾವಣಾ ಆಯೋಗವು ತನ್ನ ಅರ್ಜಿಯಲ್ಲಿ, 2020ರಲ್ಲಿ ನಡೆದಿದ್ದ ಗ್ರಾಮ ಪಂಚಾಯತ್‌ಗಳ ಅವಧಿಯು ಮುಂದಿನ ವರ್ಷ ಜನವರಿ 2026ರಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದೆ. ಸಂವಿಧಾನದ ಆರ್ಟಿಕಲ್ 243-ಇ ಅಡಿಯಲ್ಲಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸಂವಿಧಾನಾತ್ಮಕ ಕಡ್ಡಾಯತೆ ಇದ್ದು, ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲು ಅಗತ್ಯವಾದ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ, 1993 ರ ಸೆಕ್ಷನ್ 5(5) ರ ಅಡಿಯಲ್ಲಿ ಸರ್ಕಾರವೇ ಹೊರಡಿಸಬೇಕು. ಆದರೆ, ಮೀಸಲಾತಿ ನಿಗದಿಯಾಗುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. ಆಯೋಗವು ಕಳೆದ ಮೇ ತಿಂಗಳಿನಿಂದಲೂ ಮೂರು ಬಾರಿ ಪತ್ರ ಬರೆದು ಸರ್ಕಾರಕ್ಕೆ ನೆನಪಿಸಿದರೂ, ಮೀಸಲಾತಿ ಅಧಿಸೂಚನೆ ನೀಡಲು ಸರ್ಕಾರ ವಿಫಲವಾಗಿದೆ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಆಯೋಗವು ಅರ್ಜಿಯಲ್ಲಿ ವಿವರಿಸಿದೆ.

ಸರ್ಕಾರದ ಈ ವಿಳಂಬ ಧೋರಣೆಯಿಂದಾಗಿ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚುನಾವಣಾ ಆಯೋಗವು ಕಳವಳ ವ್ಯಕ್ತಪಡಿಸಿದೆ. ಇದು ಕಡ್ಡಾಯ ಚುನಾವಣಾ ಆದೇಶವನ್ನು ಉಲ್ಲಂಘಿಸುವಂತಾಗುವುದರ ಜೊತೆಗೆ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತಹ ಅನಿವಾರ್ಯತೆ ಸೃಷ್ಟಿಯಾಗಿ, ಸುಪ್ರೀಂ ಕೋರ್ಟ್‌ನ ತೀರ್ಪುಗಳ ಉಲ್ಲಂಘನೆಯೂ ಆಗುತ್ತದೆ ಎಂದು ಆಯೋಗವು ನ್ಯಾಯಾಲಯಕ್ಕೆ ತಿಳಿಸಿದೆ. 2020ರಿಂದಲೂ ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆ, ಕೆಲವು ಗ್ರಾಮ ಪಂಚಾಯತ್‌ಗಳನ್ನು ಸಣ್ಣ ನಗರ ಪ್ರದೇಶಗಳಾಗಿ ಮೇಲ್ದರ್ಜೆಗೇರಿಸಿದ ಪರಿಣಾಮ, 42 ಗ್ರಾಮ ಪಂಚಾಯತ್‌ಗಳ ಪುನರ್ ರಚನೆ, ಸದಸ್ಯರ ಸಂಖ್ಯೆ ನಿಗದಿ ಹಾಗೂ ವಿವಿಧ ವರ್ಗಗಳ ಮೀಸಲಾತಿ ನಿರ್ಧಾರ ಪ್ರಕ್ರಿಯೆಗಳು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿವೆ ಎಂದು ಆಯೋಗವು ನ್ಯಾಯಾಲಯದ ಗಮನಕ್ಕೆ ತಂದಿದೆ.

ಈ ಮಹತ್ವದ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು, ರಾಜ್ಯ ಸರ್ಕಾರವು ತನ್ನ ಕರ್ತವ್ಯವನ್ನು ತಕ್ಷಣವೇ ಪಾಲಿಸಬೇಕು ಎಂದು ಆಯೋಗವು ಕೋರಿದೆ.

Leave a Reply

Your email address will not be published. Required fields are marked *