

ಧಾರವಾಡ: ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಪ್ರಮುಖ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಮುಕ್ತರಾಗಲು ಸಾಕ್ಷರತೆ ಪ್ರಮುಖ ಸಾಧನವಾಗಿದೆ ಎಂದು ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅಭಿಪ್ರಾಯಪಟ್ಟರು.
ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಶಿಕ್ಷಣ ಮಂಟಪ’ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಅಕ್ಷರ ಕಲಿತು ತಮ್ಮ ಮೇಲಾಗುತ್ತಿರುವ ಶೋಷಣೆಯನ್ನು ಅರ್ಥಮಾಡಿಕೊಳ್ಳಬೇಕು. ಇಂದಿನ ಸಂಕೀರ್ಣ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಅತ್ಯಗತ್ಯವಾಗಿದೆ ಎಂದರು.
ಸಾಕ್ಷರತೆಯಿಂದ ದೇಶದ ಅಭಿವೃದ್ಧಿ ಸಾಧ್ಯ
ಕ.ವಿ.ವ. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಸಾಕ್ಷರತೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಇದು ನಮ್ಮ ದೇಶದ ಪ್ರತಿಷ್ಠೆಯ ಸಂಕೇತವಾಗಿದೆ. ತೊಂಬತ್ತರ ದಶಕದಲ್ಲಿ ಸಾಕ್ಷರತಾ ಆಂದೋಲನವು ಸ್ವಾತಂತ್ರ್ಯಾನಂತರದ ಎರಡನೇ ಅಲೆ ಆಗಿ ರೂಪುಗೊಂಡು ಇತಿಹಾಸ ಸೃಷ್ಟಿಸಿತು ಎಂದು ನೆನಪಿಸಿಕೊಂಡರು. ಮಹಿಳೆಯರು ಸಾಕ್ಷರತೆಯ ಮೂಲಕ ಸಂವಿಧಾನದ ಆಶಯಗಳನ್ನು ಅರಿಯಬೇಕು ಎಂದು ಅವರು ಹೇಳಿದರು.
ಗಣ್ಯರಿಗೆ ಸನ್ಮಾನ
ಸತ್ಯಸಾಯಿ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಎನ್. ಮಂಜುನಾಥ, ಸದಸ್ಯ ಕೃಷ್ಣಮೂರ್ತಿ ನಾಡಿಗೇರ, ಶಂಕರ ಕುಂಬಿ, ಎನ್.ವೈ. ಸುಣಗಾರ, ಅಶ್ವಿನಿ ಇಂಚಲ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ನಿರ್ದೇಶಕ ಜಿ.ಎಂ. ಗಣಾಚಾರ, ಶ್ರೀಶೈಲ ರಾಚಣ್ಣವರ ಮಾತನಾಡಿದರು. ಕ.ವಿ.ವ. ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಕ್ಷರತಾ ಕಾರ್ಯಕ್ರಮದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ವಿಜಯಕಲಾ ಬಡಿಗೇರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರೊ. ಸವಿತಾ ಪೋತದಾರ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ ಎಲಿಗಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

