ಪಡಿತರ ಅಕ್ಕಿ ಅಕ್ರಮ ಸಾಗಾಟ: ಪ್ರಮುಖ ಆರೋಪಿ ಸಚಿನ್ ಕಲ್ಕೂರ ಬಂಧನ

Spread the love

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ 49 ಟನ್ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಚಿನ್ ಕಲ್ಕೂರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಹಿಂದಿನ ಬೃಹತ್ ಜಾಲ ಭೇದಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಕೆಲವು ದಿನಗಳ ಹಿಂದೆ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ 49 ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಎರಡು ಲಾರಿಗಳು ಸೇರಿದಂತೆ ಹಲವು ವಾಹನಗಳನ್ನು ಜಪ್ತಿ ಮಾಡಲಾಗಿತ್ತು ಮತ್ತು ಒಂಭತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ, ಈ ವ್ಯವಸ್ಥಿತ ಅಕ್ರಮದ ಪ್ರಮುಖ ರೂವಾರಿ ಹಾವೇರಿ ಮೂಲದ ಸಚಿನ್ ಕಲ್ಕೂರ ತಲೆಮರೆಸಿಕೊಂಡಿದ್ದ.
ಆತನ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಆರಂಭದಲ್ಲಿ ವಿದೇಶದಲ್ಲಿ, ವಿಶೇಷವಾಗಿ ದುಬೈನಲ್ಲಿ ನೆಲೆಸಿದ್ದಾನೆ ಎಂಬ ಮಾಹಿತಿ ಇದ್ದರೂ, ತನಿಖೆ ವೇಳೆ ಆತನ ಇರುವಿಕೆ ಭಾರತದಲ್ಲಿಯೇ ಪತ್ತೆಯಾಗಿದೆ. ಹಲವು ದಿನಗಳ ಶೋಧದ ನಂತರ ಈಗ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಸಚಿನ್ ಕಲ್ಕೂರ ಮೇಲೆ ಈ ಹಿಂದೆಯೂ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಬಂಧಿತನಿಂದ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದ್ದು, ಆತನ ಸಹಚರರು ಮತ್ತು ಈ ಅಕ್ರಮ ಜಾಲದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಶಶಿಕುಮಾರ್ ತಿಳಿಸಿದರು.

ಈ ಬಂಧನದಿಂದ ಪಡಿತರ ಅಕ್ಕಿ ಅಕ್ರಮ ಸಾಗಾಟದ ಹಿಂದಿನ ಪ್ರಬಲ ವ್ಯವಸ್ಥಿತ ಜಾಲ ಮತ್ತು ಅದರ ಆಳವಾದ ಬೇರುಗಳನ್ನು ಬಯಲಿಗೆಳೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *