ಧಾರವಾಡ: ಜುಲೈ-2026ರ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಬಿಡುಗಡೆ ಮಾಡಲಾಗಿದ್ದು, ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರ ಆಹಾರಧಾನ್ಯ ಪಡೆಯುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 14 ಕೆಜಿ ಅಕ್ಕಿ ಹಾಗೂ 21 ಕೆಜಿ ಜೋಳ ಸೇರಿದಂತೆ ಒಟ್ಟು 35 ಕೆಜಿ ಆಹಾರಧಾನ್ಯ ವಿತರಿಸಲಾಗುತ್ತದೆ. ಅಲ್ಲದೆ, ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿಯ ನಾಲ್ಕನೇ ಸದಸ್ಯರಿಗೆ 5 ಕೆಜಿ, ಐದನೇ ಸದಸ್ಯರಿಗೆ 10 ಕೆಜಿ ಹಾಗೂ ನಂತರದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುತ್ತದೆ.
ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರಿಗೆ ಕೇಂದ್ರ ಪಡಿತರದಡಿ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ ಮತ್ತು 3 ಕೆಜಿ ಜೋಳ ಸೇರಿ ಒಟ್ಟು 5 ಕೆಜಿ ಆಹಾರಧಾನ್ಯ ನೀಡಲಾಗುತ್ತದೆ. ಇದರೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಒಟ್ಟು 10 ಕೆಜಿ ಪಡಿತರ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತದೆ.
ಜಿಲ್ಲೆಯ ಎಲ್ಲ ಅರ್ಹ ಪಡಿತರ ಚೀಟಿದಾರರು ನಿಗದಿತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಬೆರಳಚ್ಚು ದೃಢೀಕರಣದ ಮೂಲಕ ಜುಲೈ ತಿಂಗಳ ಉಚಿತ ಪಡಿತರ ಆಹಾರಧಾನ್ಯವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.


