

ಕುಂದಗೋಳ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಪಟ್ಟಣದ ತಾಲ್ಲೂಕು ಆರೋಗ್ಯ ಆಸ್ಪತ್ರೆಗೆ ಶುಕ್ರವಾರದಂದು ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳು ಮತ್ತು ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಆಸ್ಪತ್ರೆಯ ಹೊರ ಮತ್ತು ಒಳ ರೋಗಿಗಳ ವಿಭಾಗಗಳಿಗೆ ಭೇಟಿ ನೀಡಿದ ಅವರು, ನೇರವಾಗಿ ರೋಗಿಗಳೊಂದಿಗೆ ಮಾತನಾಡಿದರು. ವೈದ್ಯರಿಂದ ಸೂಕ್ತ ಚಿಕಿತ್ಸೆ ಮತ್ತು ಆರೈಕೆ ಸಿಗುತ್ತಿದೆಯೇ, ವೈದ್ಯರು ಅಥವಾ ಸಿಬ್ಬಂದಿ ಹಣದ ಬೇಡಿಕೆ ಇಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ರೋಗಿಗಳು, "ನಮ್ಮನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿದೆ ಮತ್ತು ಯಾವುದೇ ಸಮಸ್ಯೆ ಇಲ್ಲ" ಎಂದು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ರೋಗಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆದ ವಂಟಿಗೋಡಿ ಅವರು, ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ನಂತರ, ಅವರು ಆಸ್ಪತ್ರೆಯ ಹಾಜರಾತಿ ಪುಸ್ತಕ, ಔಷಧಿ ಮಳಿಗೆ ಮತ್ತು ಸ್ಟಾಕ್ ಪುಸ್ತಕಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಈ ಮೂಲಕ ದಾಖಲೆಗಳು ಸರಿಯಾಗಿ ನಿರ್ವಹಣೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಂಡರು.
ವಿದ್ಯಾರ್ಥಿ ನಿಲಯಗಳ ಪರಿಶೀಲನೆ:
ತಾಲ್ಲೂಕು ಆಸ್ಪತ್ರೆಯ ಪರಿಶೀಲನೆಯ ನಂತರ, ವಂಟಿಗೋಡಿ ಅವರು ಪಟ್ಟಣದಲ್ಲಿರುವ ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಕ್ಕೂ ಭೇಟಿ ನೀಡಿದರು. ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ವಸತಿ ನಿಲಯದಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳು ಮತ್ತು ಅಲ್ಲಿನ ಪರಿಸರದ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ರಾಜು ಮಾವರಕ, ಸಿಪಿಐ ಶಿವಾನಂದ ಅಂಬಿಗೇರ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

