
ಕುಂದಗೋಳ: ಸಹಕಾರಿ ಕ್ಷೇತ್ರವು ತನ್ನ ನಿಸ್ವಾರ್ಥ, ಪ್ರಾಮಾಣಿಕ ಮತ್ತು ಶ್ರದ್ಧಾಪೂರ್ವಕ ಸೇವೆಯಿಂದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಿದೆ ಎಂದು ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಯಲ್ಲಪ್ಪ ಆರ್. ಹೆಬಸೂರ ಅಭಿಪ್ರಾಯಪಟ್ಟರು. .
ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಆಯೋಜಿಸಿದ್ದ ತಾಲ್ಲೂಕಿನ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ.ಜನಸೇವೆಗೆ ಸಹಕಾರಿ ಕ್ಷೇತ್ರಕ್ಕೆ ಒಂದು ಸಾರ್ಥಕ ಇತಿಹಾಸವಿದೆ ಎಂದು ಅವರು ಹೇಳಿದರು
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಾಪುಗೌಡ ಡಿ. ಪಾಟೀಲ್ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ರೈತರ ಆರ್ಥಿಕ ಸಬಲೀಕರಣ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸಾವಯವ ಕೃಷಿ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ರೈತರಿಗೆ ನೀಡುತ್ತಿರುವ ಬಡ್ಡಿರಹಿತ ಸಾಲವು ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದೆ. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಸಹಕಾರಿ ಸಂಘಗಳು ಮಾಡಬೇಕು ಎಂದರು.
ಜಾಗತೀಕರಣ ಮತ್ತು ಖಾಸಗೀಕರಣದ ಸವಾಲುಗಳು ಕೃಷಿ ಚಟುವಟಿಕೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಹಾಗಾಗಿ, ಹಣ್ಣು, ತರಕಾರಿ ಮತ್ತು ಹಾಲು ಉತ್ಪಾದನೆಯಲ್ಲಿ ಸಾವಯವ ಕೃಷಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಮಂಜುನಾಥಗೌಡ ಶಂ. ಮುರಳ್ಳಿ ಮಾತನಾಡಿ, “ಸಾವಯವ ಕೃಷಿಯನ್ನು ರೈತರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬಲ್ಲವು” ಎಂದರು.
ಈ ಸಂದರ್ಭದಲ್ಲಿ ಯರಿನಾರಾಯಣಪುರ ಪಿಕಾರ್ಡ್ ಅಧ್ಯಕ್ಷ ಪ್ರಕಾಶಗೌಡ ಪಾಟೀಲ್, ಬೂ. ತರಲಘಟ್ಟ ಪಿಕಾರ್ಡ್ ಅಧ್ಯಕ್ಷ ರಾಮನಗೌಡ ಪಾಟೀಲ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಗಳಗೌಡ ಬಿ. ದಾನಪ್ಪಗೌಡರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

