
ಬೆಂಗಳೂರು (ಅ. 31): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಮತ್ತು ರಾಜ್ಯದ ಹಾಲು ಒಕ್ಕೂಟವಾದ ಕೆಎಂಎಫ್ನ (KMF) ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಲು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಪ್ಲಾಸ್ಟಿಕ್ ಬಾಟಲಿಗಳಿಗೆ ಶಾಶ್ವತ ನಿಷೇಧ
ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸುವ ಕುರಿತು ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದರೂ ಕೆಲವೆಡೆ ಇದರ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ, ಇನ್ನು ಮುಂದೆ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಕಡ್ಡಾಯವಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಮಾತ್ರ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವ ಮತ್ತು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ.
ಸಭೆ-ಕಾರ್ಯಕ್ರಮಗಳಲ್ಲಿ ನಂದಿನಿ ಉತ್ಪನ್ನಗಳ ಕಡ್ಡಾಯ ಬಳಕೆ
ಇದರ ಜೊತೆಗೆ, ಮುಖ್ಯಮಂತ್ರಿಗಳು ಮತ್ತೊಂದು ಮಹತ್ವದ ನಿರ್ದೇಶನ ನೀಡಿದ್ದು, ಮುಖ್ಯಮಂತ್ರಿಗಳು, ಸಚಿವರುಗಳು ಭಾಗವಹಿಸುವ ಸಭೆಗಳು ಹಾಗೂ ಸರ್ಕಾರದ ಎಲ್ಲಾ ಸಭೆ ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ನ ನಂದಿನಿ ತಿನಿಸುಗಳು ಮತ್ತು ಉತ್ಪನ್ನಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದ್ದಾರೆ. ಈ ನಿರ್ಧಾರವು ನಂದಿನಿ ಬ್ರ್ಯಾಂಡ್ಗೆ ಬೆಂಬಲ ನೀಡುವುದರ ಜೊತೆಗೆ, ರಾಜ್ಯದ ರೈತರು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಆರ್ಥಿಕ ಮಹತ್ವವನ್ನು ಹೊಂದಿದೆ.
ಈ ಎರಡೂ ಸೂಚನೆಗಳನ್ನು ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಇಲಾಖೆಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

