
ಧಾರವಾಡ: ಫೆ.19: ಬೇಸಿಗೆ ಕಾಲ ಪ್ರಾರಂಭವಾಗುತ್ತೀರುವದರಿಂದ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ಮತ್ತು ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ನಿಯಮಾನುಸಾರ ಬರುವ ಮಾರ್ಚ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.
ಅವರು ಇಂದು (ಫೆ. 19) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ ರಾಜ್ ಇಂಜಿನೀಯರಿಂಗ್ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಕಳೆದ ಮೂರು ವರ್ಷಗಳ ದತ್ತಾಂಶ ಹಾಗೂ ಮಾಹಿತಿ ಆಧಾರದ ಮೇಲೆ ವಿಶ್ಲೇಷಣೆ ಮಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನಚ್ಚರಿಕೆ ವಹಿಸಬೇಕು. ಸೂಕ್ತ ಕ್ರಿಯಾಯೋಜನೆ ರೂಪಿಸಿ, ಅನುಮೋದನೆ ಪಡೆದು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಜಲಜೀವನ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಗ್ರಾಮಗಳ ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಕಾರದಲ್ಲಿ ಕಾಮಗಾರಿಗಳನ್ನು ಬೇಗ ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯತಿಗಳಿಗೆ ನೀರು ಪೂರೈಕೆಯ ವ್ಯವಸ್ಥೆಯನ್ನು ಹಸ್ತಾಂತರಿಸಬೇಕು. ಗುತ್ತಿಗೆದಾರರು ಯೋಜನೆಯ ನಿಯಮಗಳ ಅನುಸಾರ ಕಾಮಗಾರಿಯನ್ನು ಕೈಗೊಂಡು ಗ್ರಾಮ ಪಂಚಾಯತಿಗಳಿಗೆ ನೀಡಲು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.
ಬೇಸಿಗೆ ಅವಧಿಯಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರಿಕೆ ವಹಿಸಬೇಕು. ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತೆಯ ಉಂಟಾಗಿ, ಕಲ್ಮಶ ನೀರು ಸೇರದಂತೆ ಮುನ್ನಜಾಗ್ರತೆ ವಹಿಸಬೇಕು. ನೀರು ಪಡೆಯುವ ಸ್ಥಳ, ಸಂಗ್ರಹ ಸ್ಥಳ ಮತ್ತು ಪೂರೈಕೆ ಸ್ಥಳಗಳಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪಡೆದು ಪರೀಕ್ಷಿಸಬೇಕು. ಶುದ್ಧ ಕುಡಿಯುವ ನೀರಿನ್ನು ಪೂರೈಸಲು ಕ್ರಮವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಲಜೀವನ ಮಿಷನ್ ಸೇರಿದಂತೆ ಕುಡಿಯುವ ನೀರು ಸರಬರಾಜು ಕುರಿತ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ, ಪಂಚಾಯತ ರಾಜ್ ಇಂಜಿನೀಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಆರ್.ಎಮ್.ಸೊಪ್ಪಿಮಠ ವೇದಿಕೆಯಲ್ಲಿದ್ದು, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಎಲ್ಲ ತಾಲೂಕುಗಳ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪಿಆರ್ಡಿ ಮತ್ತು ಆರ್ಡಬ್ಲ್ಯೂಎಸ್ ವಿಭಾಗದ ವಿವಿಧ ಅಭಿಯಂತರರು ಭಾಗವಹಿಸಿದ್ದರು.

