
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ. ಪಾಲಿಮರ್ ಉದ್ಯಮಿ ಮನೋಜ್ ಪುಗಲಿಯಾ ಎಂಬುವರಿಗೆ ಸೇರಿದ ಎರಡು ಅಂತಸ್ತಿನ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಇಂದೋರ್ ಪೊಲೀಸ್ ಆಯುಕ್ತ ಸಂತೋಷ್ ಸಿಂಗ್ ಅವರು ಮಾಹಿತಿ ನೀಡಿ, ಮನೆಯ ಹೊರಗೆ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಕಾರಿನಿಂದ ಮೊದಲು ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಮನೆಯೊಳಗೆ ಸುಮಾರು 15 ಎಲ್ಪಿಜಿ ಸಿಲಿಂಡರ್ಗಳು ಮತ್ತು ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಯನ್ನು ವ್ಯಾಪಿಸಿದೆ. ಈ ಅವಧಿಯಲ್ಲಿ ಕನಿಷ್ಠ ನಾಲ್ಕು ಸಿಲಿಂಡರ್ಗಳು ಸ್ಫೋಟಗೊಂಡಿರುವುದು ಅನಾಹುತದ ತೀವ್ರತೆಯನ್ನು ಹೆಚ್ಚಿಸಿದೆ.
ದುರಂತ ಸಂಭವಿಸಿದ ಸಮಯದಲ್ಲಿ ಕುಟುಂಬದ ಸದಸ್ಯರೆಲ್ಲರೂ ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಮನೆಯ ಬಾಗಿಲುಗಳು ಒಳಗಿನಿಂದ ಲಾಕ್ ಆಗಿದ್ದರಿಂದ ಮತ್ತು ಬೆಂಕಿ ತೀವ್ರವಾಗಿ ಆವರಿಸಿದ್ದರಿಂದ ಯಾರಿಗೂ ಹೊರಬರಲು ಸಾಧ್ಯವಾಗಲಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.
ಮೃತರನ್ನು ಮನೋಜ್ ಪುಗಲಿಯಾ (65), ವಿಜಯ್ ಸೇಥಿಯಾ (63), ಸುಮನ್ (60), ಸಿಮ್ರಾನ್ (30), ಚೋಟು ಸೇಥಿಯಾ (22) ಮತ್ತು 12 ವರ್ಷದ ಮಗು ಸೇರಿದಂತೆ ಒಟ್ಟು ಏಳು ಜನ ಎಂದು ಗುರುತಿಸಲಾಗಿದೆ. ವಿಧಿವಿಜ್ಞಾನ ತಂಡವು ಪರೀಕ್ಷೆ ನಡೆಸಿದ ನಂತರವಷ್ಟೇ ಬೆಂಕಿ ತಗುಲಲು ನಿಖರವಾದ ಕಾರಣವೇನು ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

