
ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ಗೇಟ್ಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ 50 ವರ್ಷಗಳ ಕಾಲ ಜಲಾಶಯವು ಅತ್ಯಂತ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಜಲಾಶಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ವಿಜಯನಗರ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸುಮಾರು 7.5 ಲಕ್ಷ ರೈತರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಜಲಾಶಯದ ಸುರಕ್ಷತೆ ಹಾಗೂ ರೈತರ ಹಿತದೃಷ್ಟಿಯಿಂದ ಕೈಗೊಳ್ಳಲಾದ ಈ ಐತಿಹಾಸಿಕ ಕಾಮಗಾರಿಗೆ ಇದುವರೆಗೆ ಒಟ್ಟು 54 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, ಕಾಲುವೆಗಳ ದುರಸ್ತಿ ಸೇರಿದಂತೆ ಇತರ ಅಭಿವೃದ್ಧಿ ಕೆಲಸಗಳಿಗೆ ಸುಮಾರು 315 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ. ಮೇ 7ರೊಳಗೆ ಬಾಕಿ ಇರುವ ಅಲ್ಪಸ್ವಲ್ಪ ಕೆಲಸಗಳನ್ನು ಮುಗಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಅಂದೇ ಕ್ರಸ್ಟ್ಗೇಟ್ಗಳ ಹೊಸ ಚೈನ್ಗಳು ಕೂಡ ಬರಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 15ರಂದು ನೂತನ ಕ್ರಸ್ಟ್ಗೇಟ್ಗಳ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಳೆದ ಅವಧಿಯಲ್ಲಿ ಕಾಮಗಾರಿಗಳ ವಿಳಂಬದ ಬಗ್ಗೆ ಟೀಕೆ ಮಾಡಿದವರಿಗೆ ಈ ಸಾಧನೆಯ ಮೂಲಕ ಉತ್ತರ ನೀಡಿದ್ದೇವೆ ಎಂದ ಡಿ.ಕೆ. ಶಿವಕುಮಾರ್ ಅವರು, ಜಲಾಶಯದ ಅಭಿವೃದ್ಧಿಗಾಗಿ ಒಂದು ಬೆಳೆಯನ್ನು ತ್ಯಾಗ ಮಾಡಿದ ರೈತ ಸಮುದಾಯಕ್ಕೆ ಕೋಟಿ ನಮಸ್ಕಾರಗಳನ್ನು ಅರ್ಪಿಸಿದರು. ಸದ್ಯ ಜಲಾಶಯದಲ್ಲಿ 10.5 ಟಿಎಂಸಿ ನೀರು ಸಂಗ್ರಹವಿದ್ದು, ಮುಂಬರುವ ಎರಡು ತಿಂಗಳಲ್ಲಿ ಉತ್ತಮ ಮಳೆಯಾದಲ್ಲಿ ನೀರಿನ ಮಟ್ಟ 44 ಟಿಎಂಸಿಗೆ ಏರುವ ನಿರೀಕ್ಷೆಯಿದೆ. ಈ ಆಧುನಿಕ ತಂತ್ರಜ್ಞಾನದ ಗೇಟ್ ಅಳವಡಿಕೆ ಪ್ರಕ್ರಿಯೆಯು ಇಡೀ ದೇಶಕ್ಕೆ ಮಾದರಿಯಾಗಿದ್ದು, ಉದ್ಘಾಟನಾ ಸಮಾರಂಭಕ್ಕೆ ನಾಲ್ಕು ಜಿಲ್ಲೆಗಳ ರೈತರನ್ನು ಆಹ್ವಾನಿಸಿ ಸಂಭ್ರಮಿಸಲಾಗುವುದು ಎಂದು ಅವರು ತಿಳಿಸಿದರು.

