
ಹನೂರು: ಪಾವನ ಕ್ಷೇತ್ರವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗಾಗಿ ವಿಶೇಷ ಲಾಡು ಪ್ರಸಾದ ತಯಾರಿಕಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭಕ್ತರ ಸೇವೆಯನ್ನು ಮೂಲ ಮಂತ್ರವಾಗಿಸಿಕೊಂಡಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರವು, ಜಾತ್ರೆಯ ಸಂದರ್ಭದಲ್ಲಿ ಪ್ರಸಾದದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಪ್ರಸಾದ ತಯಾರಿಕೆಯಲ್ಲಿ ಶುದ್ಧತೆ, ನೈರ್ಮಲ್ಯ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅತ್ಯಂತ ಶ್ರದ್ಧೆಯಿಂದ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ.
ಈ ಬೃಹತ್ ಸಿದ್ಧತೆಗಳ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರಘು ಎ.ಈ. ಅವರು ಇಂದು ಲಾಡು ತಯಾರಿಕಾ ಘಟಕಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಾದ ತಯಾರಿಕಾ ಪ್ರಕ್ರಿಯೆಯನ್ನು ಹತ್ತಿರದಿಂದ ವೀಕ್ಷಿಸಿದ ಅವರು, ಭಕ್ತರಿಗೆ ವಿತರಿಸಲಾಗುವ ಪ್ರತಿಯೊಂದು ಲಾಡು ಕೂಡ ಭಕ್ತಿ ಮತ್ತು ಶುದ್ಧತೆಯ ಸಂಕೇತವಾಗಿರಬೇಕು ಎಂದು ಸಿಬ್ಬಂದಿಗಳಿಗೆ ಸೂಚಿಸಿದರು. ಜಾತ್ರೆಯ ಅವಧಿಯಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಗಮವಾಗಿ ಪ್ರಸಾದ ವಿತರಣೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಇದೇ ಸಂದರ್ಭದಲ್ಲಿ ಮಾರ್ಗದರ್ಶನ ನೀಡಿದರು.
ಪರಿಶೀಲನಾ ಕಾರ್ಯದ ವೇಳೆ ಪ್ರಾಧಿಕಾರದ ವಿವಿಧ ವಿಭಾಗಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಯುಗಾದಿ ಜಾತ್ರೆಯ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಾದೇಶ್ವರ ಸ್ವಾಮಿಯ ದರ್ಶನಕ್ಕೆ ಹರಿದುಬರುವ ಭಕ್ತ ಸಮೂಹಕ್ಕೆ ದೇವರ ಕೃಪಾ ಕಟಾಕ್ಷದೊಂದಿಗೆ ಗುಣಮಟ್ಟದ ಪ್ರಸಾದ ದೊರೆಯುವಂತಾಗಲಿ ಎಂಬ ಆಶಯದೊಂದಿಗೆ ಪ್ರಾಧಿಕಾರವು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ವರದಿ: ಕಾರ್ತಿಕ್ ಗೌಡ, ಹನೂರು

