
ಕುಂದಗೋಳ: ನವೆಂಬರ್ 26: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಗೊಂದಲಗಳ ಕುರಿತು ಕುಂದಗೋಳ ಪಟ್ಟಣದ ಹಿರೇಮಠದ ಶಿತಿಕಂಠೇಶ್ವರ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲ ಜ್ಯೋತಿಷ್ಯದಲ್ಲಿ ಅಧ್ಯಯನಶೀಲರಾಗಿರುವ ಮತ್ತು ಜ್ಯೋತಿಷ್ಯ ಅಧ್ಯಯನ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಶ್ರೀಗಳು, ತಮ್ಮ ಅನುಭವದ ಆಧಾರದ ಮೇಲೆ ಡಿ.ಕೆ. ಶಿವಕುಮಾರ್ ಅವರ ಕುಂಡಲಿಯನ್ನು ಅಭ್ಯಾಸಿಸಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 15-01-1961 ರಂದು ಜನಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಸ್ತುತ ಶನಿ ಮಹಾದಶಾ ಮತ್ತು ಶುಕ್ರ ಭುಕ್ತಿ ನಡೆಯುತ್ತಿದೆ. ಕುಂಡಲಿಯ ಪ್ರಕಾರ, ಕರ್ಮದಲ್ಲಿ ಶನಿ ಇದ್ದು, ಶುಕ್ರ ತೃತಿಯಾಧಿಪತಿ ಉಚ್ಚರಾಶಿಯಲ್ಲಿ ಇರುವುದು, ಹಾಗೂ ಭಾಗ್ಯದಲ್ಲಿ ಬುಧ ಮತ್ತು ಶುಕ್ರ ಕರ್ಮಸ್ಥಾನದಲ್ಲಿ ಇರುವುದು ಅವರಿಗೆ ಸಹಕಾರಿಯಾಗಲಿದೆ. ಸೂರ್ಯ ಮಂಗಳಕರನಾಗಿದ್ದುದರಿಂದ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಶ್ರೀಗಳು ತಿಳಿಸಿದರು.
ಆದರೆ, ಅವರ ಕುಂಡಲಿಯಲ್ಲಿ ಗುರು ಕರ್ಕ ರಾಶಿಯಲ್ಲಿ ಶತ್ರು ಸ್ಥಾನದಲ್ಲಿರುವುದರಿಂದ ತಮ್ಮವರೇ ಇವರಿಗೆ ಶತ್ರುಗಳಾಗಿದ್ದಾರೆ ಎಂದು ಶ್ರೀಗಳು ವಿಶ್ಲೇಷಿಸಿದರು. ಆದರೂ, ಕರ್ಮದಲ್ಲಿ ರವಿ ಮತ್ತು ಮಂಗಳ ಇರುವುದು ಹಾಗೂ ಭಾಗ್ಯದಲ್ಲಿ ಶುಕ್ರನಿರುವುದರಿಂದ, ತಮ್ಮವರೂ (ಕಾಂಗ್ರೆಸ್) ಹಾಗೂ ಹೊರಗಿನ ಮಿತ್ರರ (ಬಿಜೆಪಿ-ಜೆಡಿಎಸ್) ಸಹಕಾರದಿಂದ ಒಂದು ತಿಂಗಳೊಳಗೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಏರುತ್ತಾರೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

